ಬೆಂಗಳೂರು ಕರಗ

ವಹ್ನಿಕುಲ ಕ್ಷತ್ರಿಯ ಜನಾಂಗದವರು ಕಳಸ ಹೊತ್ತು ನೃತ್ಯ ಮಾಡುತ್ತಾ ದೇವರ ಹರಕೆ ಒಪ್ಪಿಸುವ ಆಚರಣೆ. ಚೈತ್ರ ಹುಣ್ಣಿಮೆಯಂದು ಕರಗ ಆಚರಣೆ ನಡೆಯುತ್ತದೆ. ವಹ್ನಿಕುಲ ಕ್ಷತ್ರಿಯರ ವಿವಿಧ ಪಂಗಡಗಳು ದ್ರೌಪದಿಯನ್ನು ಕುಲದೇವತೆಯಾಗಿ ಆರಾಧಿಸುತ್ತಾರೆ. ದ್ರೌಪದಿ ಅವರಿಗೆ ಆದಿಶಕ್ತಿ. ಅವಳ ಹೆಸರಿನಲ್ಲಿಯೇ ಕರಗ ನಡೆಸುತ್ತಾರೆ. ಬೆಂಗಳೂರಿನಲ್ಲಿ ತಿಗಳರ ಪೇಟೆಯಲ್ಲಿ ದ್ರೌಪದಿ ಹಾಗೂ ಧರ್ಮರಾಯ ಸ್ವಾಮಿ ದೇಗುಲಗಳಿವೆ. ಹಾಗೆಯೇ ವಹ್ನಿ ಕುಲ ಕ್ಷತ್ರಿಯರು ಹೆಚ್ಚಾಗಿ ವಾಸ ಮಾಡುವ ಸ್ಥಳಗಳಲ್ಲಿ ಮೇಲಿನ ಎರಡೂ ದೇವಾಲಯಗಳಿರುವುದನ್ನು ಕಾಣಬಹುದು. ಕರಗ ಹಬ್ಬದ ಆಚರಣೆ ಚೈತ್ರ ಮಾಸದ ಸಪ್ತಮಿಯಿಂದ  ಶುರುವಾಗಿ ಹನ್ನೊಂದು ದಿನಗಳ ಕಾಲ ನಡೆಯುತ್ತದೆ. ಆ 11 ದಿನಗಳ ಗಡುವಿನಲ್ಲಿ, 3 ದಿನಗಳ ಕಾಲ ತಾಯಿ ದ್ರೌಪದಿ ತಮ್ಮೊಡನೆ ಇರುತ್ತಾಳೆಂದು ತಿಗಳರ ನಂಬಿಕೆ. ಬೆಂಗಳೂರಿನ ತಿಗಳರ ಪೇಟೆಯಲ್ಲಿರುವ ಧರ್ಮರಾಯಸ್ವಾಮಿ ಗುಡಿಯಲ್ಲಿ ಹಬ್ಬದ ಚಟುವಟಿಕೆಗಳು ನಡೆಯುತ್ತವೆ. ಹನ್ನೊಂದು ದಿನಗಳ ಸಡಗರದಲ್ಲಿ ಕಾರ್ಯಕ್ರಮಗಳು ಹೀಗಿರುತ್ತವೆ: ಈ ಉತ್ಸವದ ಆರಾಧನೆಯ ಸಂಪ್ರದಾಯವನ್ನು ನಡೆಸಿಕೊಂಡು ಬಂದಿರುವವರು ತಿಗಳರು ಎಂದು ಕರೆಯಲ್ಪಡುವ ವಹ್ನಿಕುಲ ಕ್ಷತ್ರಿಯರು. ವಹ್ನಿಕುಲದವರು ಕಳಸ ಹೊತ್ತು ನೃತ್ಯ ಮಾಡುತ್ತಾ ದೇವರ ಹರಕೆ ಒಪ್ಪಿಸುವ ಆಚರಣೆ ಇದಾಗಿದೆ. ಪ್ರತಿ ವರ್ಷದ ಏಪ್ರಿಲ್ ತಿಂಗಳ ಚೈತ್ರ ಹುಣ್ಣಿಮೆಯಂದು ಕರಗ ಆಚರಣೆ ನಡೆಯುತ್ತದೆ. ವಹ್ನಿಕುಲ ಕ್ಷತ್ರಿಯರ ವಿವಿಧ ಪಂಗಡಗಳು ದ್ರೌಪದಿಯನ್ನು ಕುಲದೇವತೆಯಾಗಿ ಆರಾಧಿಸುತ್ತಾರೆ. ಕರಗ ಆಚರಣೆಯ ಮೂಲವನ್ನು ಹೇಳುವ ಒಂದು ಐತಿಹ್ಯ ಹೀಗಿದೆ: ಕುರುಕ್ಷೇತ್ರ ಸಮರದ ನಂತರ ಪಾಂಡವರು ಸ್ವರ್ಗಾರೋಹಣ ಮಾಡುವ ಸಂದರ್ಭದಲ್ಲಿ ದ್ರೌಪದಿ ಮಾರ್ಛಿತಳಾಗಿ ಬಿದ್ದಳಂತೆ. ದ್ರೌಪದಿ ಮೂರ್ಛಿತಳಾಗಿ ಬಿದ್ದದ್ದು ಪಾಂಡವರಿಗೆ ತಿಳಿಯದೆ ಮುಂದೆ ನಡೆಯುತ್ತಾರೆ. ಆಕೆಗೆ ಎಚ್ಚರ ಬಂದು ನೋಡಿದಾಗ ತಿಮಿರಾಸುರ ಎಂಬ ರಾಕ್ಷಸ ದೂರದಲ್ಲಿ ನಿಂತಿದ್ದ. ಆಗ ದ್ರೌಪದಿ ಆದಿಶಕ್ತಿಯ ರೂಪವನ್ನು ತೋರುತ್ತಾ ತಿಮರಾಸುರನನ್ನು ಸದೆ ಬಡಿಯಲು, ತನ್ನ ತಲೆಯಿಂದ ಯಜಮಾನರನ್ನು, ಹಣೆಯಿಂದ ಗಣಾಚಾರಿಗಳನ್ನು, ಕಿವಿಗಳಿಂದ ಗೌಡರನ್ನು, ಬಾಯಿಯಿಂದ ಗಂಟೆಪೂಜಾರಿಗಳನ್ನು ಮತ್ತು ಹೆಗಲಿನಿಂದ ವೀರಕುಮಾರರನ್ನು ಸೃಷ್ಥಿ ಮಾಡುತ್ತಾಳೆ. ಹೀಗೆ ಹುಟ್ಟಿದ ಇವರೆಲ್ಲರೂ ಸೇರಿ ಆ ರಕ್ಕಸನ ಎದಿರು ಹೋರಾಡಿ ಗೆಲ್ಲುತ್ತಾರೆ. ಹೀಗೆ ಮಕ್ಕಳನ್ನು ಹುಟ್ಟಿಸಿದ ದ್ರೌಪದಿ ಆದಿಶಕ್ತಿಯಾಗಿ, ಮತ್ತೆ ಭೂಮಿಗೆ ಮರಳಿ ಬಾರದಂತೆ ಕೈಲಾಸಕ್ಕೆ ಹೋಗುವುದು ಮಕ್ಕಳಿಗೆ ದುಗುಡ ಉಂಟು ಮಾಡುತ್ತದೆ. ಅವಳು ಹೋಗದಂತೆ ಬೇಡಿಕೊಳ್ಳಲು ಕೃಷ್ಣನು ಅವರಿಗೆ, ತಾಯಿಯನ್ನು ಹೋಗದಂತೆ ತಡೆಯಲು ತಮ್ಮ ಕೈಯಲ್ಲಿರುವ ಕತ್ತಿಯಿಂದ ತಮ್ಮ ಎದೆಗೆ ತಿವಿದುಕೊಳ್ಳುತ್ತಾ (ಇದನ್ನು ಕರಗ ಹಬ್ಬದಲ್ಲಿ ಅಲಗುಸೇವೆಎನ್ನುತ್ತಾರೆ) ನಮಗೆ ನೀನಲ್ಲದೆ ಇನ್ಯಾರು ದಿಕ್ಕು, ಹೋಗದಿರುಎಂದು ಅಲವತ್ತು ಕೊಳ್ಳಲು ಹೇಳುವನು. ಇದನ್ನು ನೋಡಿ ದ್ರೌಪದಿಗೆ ಮರುಕವಾಗಿ ಪ್ರತಿ ವರುಷವೂ ಮೂರು ದಿನ ಭೂಮಿಗೆ ಬಂದು ಮಕ್ಕಳೊಂದಿಗೆ ಇರುವ ಮಾತು ನೀಡುತ್ತಾಳೆ. ಆ ಮೂರು ದಿನಗಳೇ ಕರಗ ಹಬ್ಬದ ದಿನಗಳು. ಇದರ ನೆನಪಿಗೆ ಕರಗ ನಡೆಯುತ್ತದೆಂದು ಹೇಳಲಾಗಿದೆ. ಇದರ ಜೊತೆಗೆ ಇನ್ನೊಂದು ಐತಿಹ್ಯವಿದೆ. ದ್ವಾಪರ ಯುಗದಲ್ಲಿ, ಒಂದು ಸರ್ವಾಲಂಕಾರ ಭೂಷಿತೆಯಾದ ದ್ರೌಪದಿ ಮಂಗಳ ಕಲಶವನ್ನು ಹಿಡಿದು ಸ್ವಯಂವರ ಮಂಟಪವನ್ನು ಪ್ರವೇಶಿಸಿದಳು. ಮತ್ಸ್ಯವನ್ನು ಭೇದಿಸುವ ಅರ್ಜುನನ್ನೂಕುಂತಿಯ ಅಭಿಲಾಷೆಯಂತೆ ಉಳಿದ ನಾಲ್ವರು ಪಾಂಡವ ಸಹೋದರರನ್ನೂ ಶಾಸ್ತ್ರೋಸ್ತವಾಗಿ ವಿವಾಹವಾದಳು. ಆಗ ಸಂತೋಷದಿಂದ ಕೈಯಲಿದ್ದ ಕಲಶವನ್ನು ಶಿರದಲ್ಲಿ ಧರಿಸಿದಳು. ಅದೇ ಕರಗವಾಯಿತು ಎಂಬ ನಂಬಿಕೆಯೂ ಇದೆ.

ಇವರು ಮೂಲತಃ ತಮಿಳುನಾಡಿನವರು. ಹದಿನೈದನೆಯ ಶತಮಾನದಲ್ಲಿಯೇ ಮೈಸೂರು ಸಂಸ್ಥಾನಕ್ಕೆ ಬಂದು ನೆಲೆಸಿದರೆಂದು ತಿಳಿದು ಬರುತ್ತದೆ. ಹೈದರಾಲಿಯು ದಕ್ಷಿಣ ಭಾರತದ ಮೇಲೆ ದಂಡಯಾತ್ರೆ ಮಾಡಿದಾಗ ವೀರಾವೇಶದಿಂದ ಹೈದರಾಲಿಯ ವಿರುದ್ಧ ಹೋರಾಡುತ್ತಾರೆ. ಈ ವಹ್ನಿಕುಲ ಕ್ಷತ್ರಿಯರಲ್ಲಿನ ಧೈರ್ಯ ಹಾಗೂ ಇವರ ಕುಲ ಪ್ರವೃತ್ತಿ ತೋಟಗಾರಿಕೆಯನ್ನು ಮೆಚ್ಚಿ ತಾನು ಮೈಸೂರಿಗೆ ಹಿಂತಿರುಗುವಾಗ ಈ ಮನೆತನದ ಕೆಲವರನ್ನು ತನ್ನೊಡನೆ ಕರೆತಂದು ಶ್ರೀರಂಗಪಟ್ಟಣದ ಗಂಜಾಂನಲ್ಲೂ, ಬೆಂಗಳೂರಿನಲ್ಲೂ ಬದುಕಲು ಆಶ್ರಯ ನೀಡಿದನೆಂದು ಇತಿಹಾಸ ಹೇಳುತ್ತದೆ. ಆನಂತರ ಈ ಜನಾಂಗ ಬೆಂಗಳೂರುತುಮಕೂರು, ಕೋಲಾರ ಜಿಲ್ಲೆಗಳಲ್ಲಿ ವಿಸ್ತರಿಸಿದಂತೆ ಕಾಣುತ್ತದೆ. ಇವರು ಪ್ರಾರಂಭದಿಂದಲೂ ಪಾಂಡವರ ಆರಾಧಕರು. ಇವರ ಮೂಲ ಪುರುಷ ಬೆಂಕಿಯಲ್ಲಿ ಜನಿಸಿದನೆಂಬ ಪ್ರತೀತಿ ಇದೆ. ಆದ್ದರಿಂದಲೇ ಅಗ್ನಿ ಸಂಭವೆಯೂ ಪಾಂಡವರ ಪತ್ನಿಯೂ ಆದ ದ್ರೌಪದಿಯ ಹೆಸರಿನಲ್ಲೇ ಕರಗದ ಆಚರಣೆಯನ್ನು ಇವರು ನಡೆಸುತ್ತಾ ಬಂದಿದ್ದಾರೆ.

ಕರಗ ಹೊರುವ ವೀರ ಕುಮಾರರು ಎಲ್ಲ ಬಗೆಯಲ್ಲಿ ಶುಚಿತ್ವವನ್ನು ಕಾಪಾಡಿಕೊಂಡಿರುತ್ತಾರೆ. ಹುಣ್ಣಿಮೆಗೆ ಒಂಭತ್ತು ದಿನ ಇರುವಾಗ ಕರಗದ ಧಾರ್ಮಿಕ ಆಚರಣೆಗಳು ಆರಂಭವಾಗುತ್ತವೆ. ಮೊದಲು ಧರ್ಮರಾಯನ ಮಂದಿರದ ಮುಂದೆ ದ್ವಜಾರೋಹಣ, ದೀಪಾರತಿ ಉತ್ಸವ, ಹಸಿ ಕರಗ, ಪೊಂಗಲು ಸೇವೆ, ಹೂವಿನ ಕರಗ, ವಸಂತೋತ್ಸವ, ಗಾವುಸೇವೆ ಇತ್ಯಾದಿಗಳು ನಡೆಯುತ್ತದೆ. ಈ ಎಲ್ಲ ವಿಧಿ ವಿಧಾನಗಳಲ್ಲಿಯ ಗೌಪ್ಯತೆಯನ್ನು ಕಾಪಾಡಿಕೊಳ್ಳುತ್ತಾರೆ.

ಕರಗದ ಹಿಂದಿನ ದಿನದಿಂದಲೇ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಅತ್ಯಂತ ವಿಧಿವತ್ತಾದ ಧಾರ್ಮಿಕ ಕಾರ್ಯಕ್ರಮಗಳು ನಡೆದ ನಂತರ ನಡುರಾತ್ರಿಯ ವೇಳೆಗೆ ಕಳಸದ ಆಕೃತಿಯ ಮಲ್ಲಿಗೆ ಹೂವಿನ ಕರಗವನ್ನು ಮುಖ ಮುಚ್ಚುವಂತೆ ತಲೆಯ ಮೇಲೆ ಹೊತ್ತ ಪೂಜಾರಿ ನರ್ತಿಸುತ್ತಾ ಗುಡಿಯಿಂದ ಹೊರಬರುತ್ತಾರೆ. ಧಾರ್ಮಿಕವಾಗಿ ಇವರು ಸಾಕ್ಷಾತ್ ಆದಿಶಕ್ತಿಯ ರೂಪ. ಖಡ್ಗವನ್ನು ಹಿಡಿದ ವೀರಕುಮಾರರು ಗೋವಿಂದ... ಗೋವಿಂದ... ಗೋವಿಂದ ಎನ್ನುತ್ತಾ, ಡಿ. ಡಿ. ಡಿ. ಡಿ ಕ್. ಡಿ... ಎಂದು ಕೂಗಿ ಅಲಗು ಸೇವೆಯನ್ನು ಮಾಡುತ್ತ ಕರಗದ ಪೂಜಾರಿಯನ್ನು ಅನುಸರಿಸುತ್ತಾರೆ. ಆಧಿಶಕ್ತಿ ದುಷ್ಟಶಕ್ತಿಯನ್ನು ಸಂಹರಿಸಿದ ಸಂಕೇತವಾಗಿ ಕರಗ ಆಚರಣೆ ನಡೆಯುತ್ತದೆ.

ಬೆಂಗಳೂರಿನ ಧರ್ಮರಾಯನ ದೇವಸ್ಥಾನ ಕರಗ ಮಹೋತ್ಸವದ ಕೇಂದ್ರ. ಈ ದೇವಾಲಯದ ನಿರ್ಮಾಣ ಯಾವಾಗ ಆಯಿತೆಂದು ಸ್ವಷ್ಟ ಆಧಾರಗಳಿಲ್ಲ. ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದ ಕಾಲಕ್ಕಾಗಲೇ ಆ ದೇವಾಲಯ ಇತ್ತೆಂದು ಕೆಲವರು ಹೇಳಿದರೆ, ಕೆಲವರು ವಹ್ನಿಕುಲ ಕ್ಷತ್ರಿಯರು ಬೆಂಗಳೂರಿಗೆ ಬಂದು ನೆಲೆಸಿದ ಮೇಲೆ ನಿರ್ಮಾಣವಾಯಿತ್ತೆನ್ನುತ್ತಾರೆ. ನಂತರ ಮುಮ್ಮಡಿ ಕೃಷ್ಣರಾಜ ಒಡೆಯರು ಧರ್ಮರಾಯ ದೇವಾಸ್ಥಾನಕ್ಕೆ ಇನಾಂ ಜಮೀನುಗಳನ್ನು ಕೊಟ್ಟುದಕ್ಕೆ ದಾಖಲೆ ಇದೆ. ದೇವಾಲಯವು ವಿಶಾಲವಾದ ಅಂಗಳ, ಅಶ್ವತ್ಥಕಟ್ಟೆ, ವಿಸ್ತಾರವಾದ ಕಂಬಗಳು ತೂಗು ಉಯ್ಯಾಲೆಗಳಿಂದ ಕೂಡಿ ಆಕರ್ಷಕವಾಗಿದೆ. ದ್ರಾವಿಡ ಶೈಲಿಯ ಮೂರು ಸಚಿತ್ರ ಗೋಪುರಗಳಿವೆ. ಮಹಾದ್ವಾರದ ಮೂಲಕ ಒಳಗೆ ಪ್ರವೇಶಿಸಿದರೆ ಮುಖ್ಯ ಮಂಟಪದ ಎರಡು ಕಡೆಗಳಲ್ಲಿ ಕಲ್ಲಿನ ಆನೆಯ ಸುಂದರಾಕೃತಿಗಳಿವೆ. ಮೂದಲಾರ್ಧ ಭಾಗದ ಮಂಟಪ ಭದ್ರವಾದ ಕೆತ್ತನೆಯ ಶಿಲಾ ಸ್ತಂಭಗಳ ಮೇಲೆ ನಿಂತಿದೆ. ಉಳಿದರ್ಧ ಭಾಗ ಗರ್ಭಗುಡಿ. ಈ ದೇವಾಲಯದ ಗರ್ಭಗುಡಿಯೊಳಗೆ ಪ್ರೇಕ್ಷಕರ ಎಡಭಾಗಕ್ಕೆ ಧರ್ಮರಾಯಸ್ವಾಮಿ, ಬಲಭಾಗಕ್ಕೆ ಶ್ರೀಕೃಷ್ಣನ ವಿಗ್ರಹಗಳಿವೆ. ಇವೆರಡರ ಮುಂಭಾಗದಲ್ಲಿ ದಿವ್ಯಶಕ್ತಿಯ ಪೀಠವಿದೆ. ಈ ಪೀಠದ ಮೇಲೆಯೇ ಹಸೀಕರಗವನ್ನು ಅಲಂಕರಿಸಿ ಅರ್ಚಿಸುವುದು. ಇದರ ಜತೆಗೆ ಅರ್ಜುನ, ದ್ರೌಪದಿ, ಭೀಮಸೇನರ ಸುಂದರ ಮೂರ್ತಿಗಳಿವೆ. ಬೆಂಗಳೂರು ಕರಗ ಒಂಬತ್ತು ದಿನಗಳ ಸಮಾರಂಭ. ಹೊಸವರ್ಷದ ಯುಗಾದಿ ಹಬ್ಬದ ಆನಂತರ ಸಪ್ತಮಿ ಅಥವಾ ಅಷ್ಟಮಿಯಂದು ದ್ವಜಾರೋಹಣದಿಂದ ಆರಂಭವಾಗಿ ಬಿದಿಗೆಯಂದಿನ ಧ್ವಜಾರೋಹಣದವರೆಗೆ ವಿವಿಧ ಕಾರ್ಯಕ್ರಮವಿರುತ್ತವೆ. ಇವುಗಳಲ್ಲಿ ದ್ವಾದಶಿಯಂದು ನಡೆಯುವ ಸಮುದಾಯದ ಆರತಿ, ತ್ರಯೋದಶಿಯಂದು ಹಸೀಕರಗದ ರಚನೆ ಮತ್ತು ಸ್ಥಾಪನೆ, ಚತುರ್ದಶಿಯಂದು ಪೊಂಗಲುಸೇವೆ ಮತ್ತು ಪೂರ್ಣಿಮೆಯಂದು ನಡೆಯುವ ಕರಗದ ಉತ್ಸವ ಪ್ರಮುಖ ಕಾರ್ಯಕ್ರಮಗಳಾಗಿವೆ.

ಬೆಂಗಳೂರಿನ ತಿಗಳರ ಪೇಟೆ, ಬಳೇಪೇಟೆ, ಚಿಕ್ಕಪೇಟೆ, ಅಣ್ಣಮ್ಮ ಇತ್ಯಾದಿ ದೇವಸ್ಥಾನಗಳಲ್ಲಿ ಕರಗಧಾರಿಗಳು ಸಂಚರಿಸಿ ಸೂರ್ಯೋದಯದ ವೇಳೆಗೆ ಧರ್ಮರಾಯಸ್ವಾಮಿ ಗುಡಿಗೆ ಬರುತ್ತಾರೆ. ಇಲ್ಲಿಯ ಒಂದು ವಿಶೇಷವೆಂದರೆ ಭಾವೈಕ್ಯದ ಸಂಕೇತವೆಂಬಂತೆ ಕರಗದಾರಿಗಳು ಮೊದಲು ಮಸ್ತಾನ್ ಸಾಬ್ ದರ್ಗಾಕ್ಕೆ ತೆರಳಿ, ಅಲ್ಲಿ ಧೂಪಾರತಿ ಸ್ವೀಕರಿಸಿ ನಂತರ ನಗರದ ಪ್ರದಕ್ಷಿಣೆ ಹೊರಡುತ್ತಾರೆ. ಕರಗಧಾರಿಗಳ ಸ್ವಾಗತಕ್ಕೆ ಮನೆಗಳ ಮುಂದೆ ರಂಗೋಲಿ, ತಳಿರು ತೋರಣಗಳಿಂದ ಅಲಂಕೃತಗೊಂಡಿರುತ್ತದೆ. ಕರಗವನ್ನು ಸಾವಿರಾರು ಜನ ರಾತ್ರಿ ಇಡೀ ರಸ್ತೆಯ ಇಕ್ಕೆಲ ಗಳಲ್ಲಿ ನಿಂತು ನೋಡುತ್ತಾರೆ.